ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ನಗರ ಸಭೆ ಪುತ್ತೂರು, ತಾಲ್ಲೂಕು ಯುವಜನ ಒಕ್ಕೂಟ ಪುತ್ತೂರು, ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ, ವಾಲಿ ಫ್ರೆಂಡ್ಸ್ ಪಟ್ಟೆ ಇದರ ಸಹಯೋಗದೊಂದಿಗೆ ಪುತ್ತೂರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.23 ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಗೂ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ,
ವಿದೇಶಗಳಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹೆಚ್ಚಿನ ತರಬೇತಿಗಳನ್ನು ಆಯೋಜನೆ ಮಾಡುವ ಮೂಲಕ ಅವರ ಪ್ರಗತಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಬೇಕು. ಆದರೆ ನಮ್ಮಲ್ಲಿ ಅಂತಹ ತರಬೇತಿ ಕ್ರೀಡಾಪಟುಗಳಿಗೆ ದೊರೆಯಬೇಕಾದರೆ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾಗಿದೆ. ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ನಮ್ಮ ದೇಶ ಹೆಚ್ಚಿನ ಪ್ರಗತಿ ಸಾಧಿಸಬೇಕಾದರೆ ಕನಿಷ್ಠ ತಾಲೂಕು ಮಟ್ಟದಲ್ಲಿ ಕ್ರೀಡಾ ತರಬೇತಿ ಕೇಂದ್ರಗಳ ಸ್ಥಾಪನೆ ಯಾಗಬೇಕಾಗಿದೆ ಎಂದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ಮಾತನಾಡಿ, ಕ್ರೀಡೆ ಮಾನವನ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ.ಗ್ರಾಮೀಣ ಭಾಗದಲ್ಲಿ ಹೆಚ್ಚು ಕ್ರೀಡಾಕೂಟಗಳು ಆಯೋಜನೆ ಮಾಡಿದರೆ ಕ್ರೀಡಾಪಟುಗಳಿಗೆ ಪ್ರಯೋಜನವಾಗಬಹುದಾಗಿದೆ ಎಂದರು.
ವೇದಿಕೆಯಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ರಾಜ್ಯ ಪ್ರಶಸ್ತಿ ಪುರಸ್ಕೃತ ದಯಾನಂದ ರೈ ಕೊರ್ಮಂಡ, ರಾಜ್ಯ ದೈಹಿಕ ಶಿಕ್ಷಣ ಸಂಘದ ಸೀತಾರಾಮ ರೈ ಮಿತ್ತಡ್ಕ, ಸುಳ್ಯದ ನೋಡೆಲ್ ಅಧಿಕಾರಿ ದೇವರಾಜ್ ಮುತ್ತಾಜೆ, ಕೆಡಿಪಿ ಮಾಜಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಮತ್ತು ರಾಜ್ಯ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗ್ರೇಡ್ 1 ಇದರ ಅಧ್ಯಕ್ಷ ಸೀತಾರಾಮ ಗೌಡ, ಗ್ರೇಡ್ ೨ ಇದರ ಅಧ್ಯಕ್ಷ ಸುಧಾಕರ್ ರೈ, ದಯಾನಂದ ರೈ, ಶ್ರೀಕೃಷ್ಣ ಯುವಕ ಮಂಡಲ, ಲಿಂಗಪ್ಪ ಗೌಡ, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಇದ್ದರು.
ಪುತ್ತೂರು ಮತ್ತು ಕಡಬ ತಾಲೂಕು ದಸರಾ ಕ್ರೀಡಾಕೂಟದ ನೋಡೆಲ್ ಅಧಿಕಾರಿ ಎಂ.ಮಾಮಚ್ಚನ್ ಸ್ವಾಗತಿಸಿ, ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿ,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಮೇಲ್ವಿಚಾರಕ ಶ್ರೀಕಾಂತ್ ಬಿರಾವು ವಂದಿಸಿದರು.