ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಕೆ.ಶಿವಕುಮಾರ್
ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಕೆ.ಶಿವಕುಮಾರ್
20 ಕಂಬಳಗಳಿಗೆ ತಲಾ 5 ಲಕ್ಷದಂತೆ ಒಂದು ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡುವ ಮೂಲಕ ದೇಸಿ ಮತ್ತು ಐತಿಹಾಸಿಕ ಕಂಬಳ ಕ್ರೀಡೆ ಪ್ರೋತ್ಸಾಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಬೆಳಿಗ್ಗೆ ಬೆಂಗಳೂರು ಕಂಬಳದ ಕರೆಪೂಜೆ ನೆರವೇರಿಸಿ ಮಾತನಾಡಿದ ಅವರು ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು. ಸಾವಿರಾರು ಯುವಕರು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ಧತೆಯಿಂದ ಇಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ ಎಂದರು.